ರಾಷ್ಟ್ರ ರಾಜಧಾನಿ ದೆಹಲಿಯ ಅಧಿಕಾರಿಗಳ ವರ್ಗಾವಣೆ ಹಾಗೂ ನೇಮಕಾತಿ ಅಧಿಕಾರವನ್ನು ತನ್ನ ಬಳಿಯೇ ಉಳಿಸಿಕೊಳ್ಳಲು ಮಸೂದೆ ಮಂಡಿಸಲು ಸಿದ್ಧವಾಗುತ್ತಿರುವ ಕೇಂದ್ರ ಸರ್ಕಾರಕ್ಕೆ ಈಗ ಭರ್ಜರಿ ಬೆಂಬಲ ದೊರಕಿದೆ. ಆಂಧ್ರ ಮುಖ್ಯಮಂತ್ರಿ ಜಗನ್ಮೋಹನರೆಡ್ಡಿ ನೇತೃತ್ವದ ವೈಎಸ್ಸಾರ್ಕಾಂಗ್ರೆಸ್, ವಿಧೇಯಕ ಪರ ಬೆಂಬಲ ಘೋಷಣೆ ಮಾಡಿದೆ. ಇದರಿಂದಾಗಿ ಬಹುಮತದ ಕೊರತೆ ಎದುರಿಸುತ್ತಿರುವ ರಾಜ್ಯಸಭೆಯಲ್ಲೂ ಕೇಂದ್ರ ಸರ್ಕಾರ ಈ ವಿಧೇಯಕವನ್ನು ಸುಲಭವಾಗಿ ಅಂಗೀಕರಿಸಿಕೊಳ್ಳಲು ಹಾದಿ ಸುಗಮವಾಗಿದೆ. ತನ್ಮೂಲಕ, ವಿಧೇಯಕ ಮಣಿಸಲು ದೇಶದ ಹಲವು ರಾಜ್ಯಗಳಿಗೆ ತೆರಳಿ ರಾಜಕೀಯ ಪಕ್ಷಗಳ ಬೆಂಬಲ ಗಳಿಸಲು ಯತ್ನಿಸಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ಅವರಿಗೆ ತೀವ್ರ ಹಿನ್ನಡೆಯಾಗಿದೆ.